10/08/2026
ಹಳೇ ದಾಂಡೇಲಿ ರಸ್ತೆ ದುರಸ್ತಿಗೆ ಆಗ್ರಹ3 ದಿನದಲ್ಲಿ ತುರ್ತು ಕಾಮಗಾರಿ ಭರವಸೆ
ದಾಂಡೇಲಿ, ಹಳೇ ದಾಂಡೇಲಿ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ತಕ್ಷಣ ದುರಸ್ತಿ ಕೈಗೊಳ್ಳುವಂತೆ ಒತ್ತಾಯಿಸಿ ಸ್ಥಳೀಯರು ಹಾಗೂ ಹೋರಾಟಗಾರರು ಸೋಮವಾರ ಬೆಳಗ್ಗೆ 10.30ರ ಸುಮಾರಿಗೆ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ರಸ್ತೆ ಗುಂಡಿಗಳಿಂದ ಕೂಡಿದ್ದು, ಮಳೆನೀರಿನಿಂದ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದೆ. ಇದರಿಂದ ವಾಹನ ಸವಾರರು ಹಾಗೂ ಪಾದಚಾರಿಗಳು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ತಿಳಿಸಿದರು.
ಸ್ಥಳಕ್ಕೆ ಆಗಮಿಸಿದ ನಗರಸಭೆ ಪೌರಾಯುಕ್ತ ವಿವೇಕ್ ಬನ್ನೆ ಹಾಗೂ ತಹಶೀಲ್ದಾರ್ ಶೈಲೇಶ್ ಪರಮಾನಂದ ಅವರು ಅಧಿಕಾರಿಗಳೊಂದಿಗೆ ರಸ್ತೆಯಲ್ಲಿ ನಡೆದುಕೊಂಡು ಹೋಗಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ರಸ್ತೆಯ ತುರ್ತು ದುರಸ್ತಿ ಜೊತೆಗೆ ಗಟಾರ ವ್ಯವಸ್ಥೆ ಸರಿಪಡಿಸುವಂತೆ ಸಾರ್ವಜನಿಕರು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ದಾಂಡೇಲಿ ಸಮಗ್ರ ಹೋರಾಟ ಸಮಿತಿ ಅಧ್ಯಕ್ಷ ಅಕ್ರಮ್ ಖಾನ್, ಉಪಾಧ್ಯಕ್ಷ ಅಶೋಕ್ ಪಾಟೀಲ್, ಜಾಂಬವಂತ ಸಂಘಟನೆ ಅಧ್ಯಕ್ಷ ಚಂದ್ರಕಾಂತ್ ನಾಡಿಗೇರ್, ಗೌಸ್ ಬೆಟಗೇರಿ, ಸಮೀರ್ ಶೇಕ್ ತಂಬಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಹಲವಾಯಿ, ಅನಿಲ್ ನಾಯಕ್ ಸೇರಿದಂತೆ ಸ್ಥಳೀಯರು ಭಾಗವಹಿಸಿದ್ದರು. ಪಿಎಸ್ಐಗಳಾದ ಅಮೀನ್ ಅತ್ತಾರ್ ಹಾಗೂ ಪೊಲೀಸ್ ಸಿಬ್ಬಂದಿ ಸ್ಥಳದಲ್ಲಿದ್ದರು.
ಈ ವೇಳೆ ಪೌರಾಯುಕ್ತ ವಿವೇಕ್ ಬನ್ನೆ ಅವರು ಮೂರು ದಿನಗಳಲ್ಲಿ ತುರ್ತು ರಸ್ತೆ ದುರಸ್ತಿ ಹಾಗೂ 15 ದಿನಗಳ ನಂತರ ಉತ್ತಮ ಗುಣಮಟ್ಟದ ರಸ್ತೆ ನಿರ್ಮಾಣ ಕಾಮಗಾರಿ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಭರವಸೆ ಈಡೇರದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಪ್ರತಿಭಟನಾಕಾರರು ಎಚ್ಚರಿಸಿದರು.