16/01/2026
ಪೌರಾಯುಕ್ತ ಅಮೃತಾಗೌಡಗೆ ಬೆದರಿಕೆ: ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ವಿರುದ್ಧ FIR, ಕೈ ನಾಯಕ ನಾಪತ್ತೆ
ಶಿಡ್ಲಘಟ್ಟ: ನಗರಸಭೆ ಪೌರಾಯುಕ್ತ ಅಮೃತಾಗೌಡ ಅವರಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಎದುರು ಶಿಡ್ಲಘಟ್ಟ ನಗರ ಪೊಲೀಸ್ ಠಾಣೆಯಲ್ಲಿ ಗಂಭೀರ ಪ್ರಕರಣಗಳು ದಾಖಲಾಗಿವೆ. ಎಫ್ಐಆರ್ ದಾಖಲಾಗುತ್ತಿದ್ದಂತೆ ಬಂಧನದ ಭೀತಿಯಿಂದ ರಾಜೀವ್ ಗೌಡ ತಲೆಮರೆಸಿಕೊಂಡಿದ್ದು, ಪೊಲೀಸರು ಶೋಧ ಕಾರ್ಯ ಚುರುಕುಗೊಳಿಸಿದ್ದಾರೆ.
ನಗರದಲ್ಲಿ ಬ್ಯಾನರ್ ಅಳವಡಿಸುವ ವಿಚಾರವಾಗಿ ರಾಜೀವ್ ಗೌಡ ಮತ್ತು ಪೌರಾಯುಕ್ತ ಅಮೃತಾಗೌಡ ಅವರ ನಡುವೆ ಭಿನ್ನಾಭಿಪ್ರಾಯ ಉಂಟಾಗಿತ್ತು. ಈ ವೇಳೆ ರಾಜೀವ್ ಗೌಡ ಪೌರಾಯುಕ್ತರಿಗೆ ಬೆದರಿಕೆ ಹಾಕಿದ್ದಾರೆನ್ನಲಾದ ವೀಡಿಯೊ ವೈರಲ್ ಆಗಿತ್ತು. ಈ ಕುರಿತು ಸ್ವತಃ ಪೌರಾಯುಕ್ತ ಅಮೃತಾಗೌಡ ಮತ್ತು ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಶ್ರೀನಿವಾಸಗೌಡ ಪ್ರತ್ಯೇಕ ದೂರುಗಳನ್ನು ದಾಖಲಿಸಿದ್ದಾರೆ.
ಪೌರಾಯುಕ್ತರು ನೀಡಿದ ದೂರಿನನ್ವಯ ಹೊಸ ಭಾರತೀಯ ನ್ಯಾಯ ಸಂಹಿತೆ (BNS) ಅಡಿ ಈ ಕೆಳಗಿನ ಸೆಕ್ಷನ್ಗಳಡಿ ಪ್ರಕರಣ ದಾಖಲಾಗಿದೆ: ಸೆಕ್ಷನ್ 132: ಆಳಿಕೆ ಕೆಲಸಕ್ಕೆ ಅಡ್ಡಿ ಹಾಗೂ ಬೆದರಿಕೆ. ಸೆಕ್ಷನ್ 351(3): ಸರ್ಕಾರಿ ಕಚೇರಿಗೆ ಬೆಂಕಿ ಹಚ್ಚುವ ಬೆದರಿಕೆ ಹಾಗೂ ಮಹಿಳೆಯ ಚಾರಿತ್ರ್ಯವಧೆ. ಸೆಕ್ಷನ್ 56: ಅಪರಾಧಕ್ಕೆ ಪ್ರಚೋದನೆ. ಸೆಕ್ಷನ್ 224: ಸರ್ಕಾರಿ ನೌಕರನಿಗೆ ದೈಹಿಕ ಹಾಗೂ ಮಾನಸಿಕ ಬೆದರಿಕೆ. ಸೆಕ್ಷನ್ 352: ಶಾಂತಿ ಭಂಗಕ್ಕೆ ಪ್ರಚೋದನೆ ನೀಡುವ ಉದ್ದೇಶದಿಂದ ಅವಮಾನ. ಇದಲ್ಲದೆ, ಜೆಡಿಎಸ್ ತಾಲ್ಲೂಕು ಅಧ್ಯಕ್ಷರು ನೀಡಿದ ದೂರಿನ ಮೇರೆಗೆ ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ಳು ಮಾಹಿತಿ ಹರಡಿದ ಆರೋಪದಡಿ (ಸೆಕ್ಷನ್ 353(2)) ಪ್ರಕರಣ ದಾಖಲಾಗಿದೆ.
ಪ್ರಕರಣ ದಾಖಲಾಗುತ್ತಿದ್ದಂತೆ ರಾಜೀವ್ ಗೌಡ ತಮ್ಮ ಎರಡು ಮೊಬೈಲ್ ಫೋನ್ಗಳನ್ನು ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾರೆ. ಆರೋಪಿಯ ಬಂಧನಕ್ಕಾಗಿ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಷೆ ಅವರು ಎರಡು ವಿಶೇಷ ತಂಡಗಳನ್ನು ರಚಿಸಿದ್ದಾರೆ. ಸದ್ಯ ಸೆನ್ (CEN) ಪೊಲೀಸರು ಮತ್ತು ನಗರ ಠಾಣೆಯ ಪೊಲೀಸರು ತಲೆಮರೆಸಿಕೊಂಡಿರುವ ಕೈ ನಾಯಕನಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ.
ಈ ಬೆಳವಣಿಗೆಗಳ ನಡುವೆ, ರಾಜೀವ್ ಗೌಡ ವೀಡಿಯೊ ಒಂದನ್ನು ಬಿಡುಗಡೆ ಮಾಡಿದ್ದು, "ಯಾವುದೇ ಕೆಟ್ಟ ಉದ್ದೇಶದಿಂದ ನಾನು ಮಾತನಾಡಿಲ್ಲ. ಬ್ಯಾನರ್ ತೆರವುಗೊಳಿಸಿದ ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ಈ ಘಟನೆ ನಡೆದಿದೆ. ಪೌರಾಯುಕ್ತರು ನನಗೆ ಸಹೋದರಿ ಸಮಾನ. ನನ್ನ ಮಾತಿನಿಂದ ಅವರಿಗೆ ನೋವಾಗಿದ್ದರೆ ಕ್ಷಮೆಯಾಚಿಸುತ್ತೇನೆ,'' ಎಂದು ಹೇಳಿದ್ದಾರೆ.
ಆದರೆ, ಪ್ರಕರಣ ಈಗ ನ್ಯಾಯಾಲಯದ ಮೆಟ್ಟಿಲೇರಿರುವುದರಿಂದ ಪೊಲೀಸರು ಕಾನೂನು ಕ್ರಮ ಮುಂದುವರಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಹೈಕಮಾಂಡ್ ತನ್ನ ಮುಖಂಡನ ಈ ವರ್ತನೆಯ ಬಗ್ಗೆ ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಎಂಬುದು ಈಗ ಕುತೂಹಲ ಮೂಡಿಸಿದೆ.