30/05/2026
#ಶಿಕ್ಷಕರ ಹಾಜರಾತಿಗೆ #ಕಠಿಣ ನಿಯಮ: #ಸರ್ಕಾರದ ನಿರ್ಧಾರಕ್ಕೆ #ಗ್ರಾಮೀಣ ಪೋಷಕರ ಹರ್ಷ
ಶ್ರೀನಿವಾಸಪುರ: ಸರ್ಕಾರಿ ಶಾಲಾ ಶಿಕ್ಷಕರ ಹಾಜರಾತಿ ಕುರಿತು ಸರ್ಕಾರ ಇತ್ತೀಚೆಗೆ ಕೈಗೊಂಡಿರುವ ಕಠಿಣ ನಿರ್ಧಾರವನ್ನು ಗ್ರಾಮೀಣ ಭಾಗದ ಪೋಷಕರು ಮುಕ್ತಕಂಠದಿಂದ ಸ್ವಾಗತಿಸಿದ್ದಾರೆ. ಶಿಕ್ಷಕರ ಹಾಜರಾತಿ ವಿಚಾರದಲ್ಲಿ ಇನ್ನಷ್ಟು ಕಠಿಣ ನಿಯಮಗಳನ್ನು ಜಾರಿಗೆ ತಂದರೆ ಮಾತ್ರ ಗ್ರಾಮೀಣ ಪ್ರದೇಶಗಳಲ್ಲಿ ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳಲು ಸಾಧ್ಯ ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ.
ಕೆಲವು ಸರ್ಕಾರಿ ಶಾಲಾ ಶಿಕ್ಷಕರು ಸಕ್ರಿಯವಾಗಿ ರಾಜಕೀಯ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಹಾಗೂ ಶಾಲಾ ಅವಧಿಯಲ್ಲಿ ವೈಯಕ್ತಿಕ ಕೆಲಸಗಳಲ್ಲಿ ನಿರತರಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಇದರಿಂದ ಬೇಸತ್ತ ಗ್ರಾಮೀಣ ಭಾಗದ ಪೋಷಕರು, ತಮ್ಮ ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಅನಿವಾರ್ಯವಾಗಿ ಖಾಸಗಿ ಶಾಲೆಗಳ ಮೊರೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.
ಪ್ರಸ್ತುತ ಸರ್ಕಾರದ ಈ ಹೊಸ ನಡೆ ಪೋಷಕರಲ್ಲಿ ಭರವಸೆ ಮೂಡಿಸಿದೆ. ಸರ್ಕಾರದ ಈ ನಿರ್ಧಾರದ ಬೆನ್ನಲ್ಲೇ ಪೋಷಕರು ಮತ್ತೊಂದು ಪ್ರಮುಖ ಬೇಡಿಕೆಯನ್ನು ಮುಂದಿಟ್ಟಿದ್ದಾರೆ. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಂದೊಂದು ಇಂಗ್ಲಿಷ್ ಮಾಧ್ಯಮ ವಸತಿ ಶಾಲೆಯನ್ನು ಆರಂಭಿಸಬೇಕು. ಅಲ್ಲದೆ, ಗ್ರಾಮೀಣ ಭಾಗದ ಮಕ್ಕಳಿಗೆ ಶಾಲೆಗೆ ತೆರಳಿ ಮರಳಲು ಸೂಕ್ತ ವಾಹನ (ಬಸ್) ಸೌಲಭ್ಯವನ್ನು ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.
ಗ್ರಾಮೀಣ ಭಾಗದ ಕೂಲಿ ಕಾರ್ಮಿಕರು ಹಾಗೂ ಬಡ ಕುಟುಂಬಗಳು ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕೆಂಬ ಆಶಯದಿಂದ ಸಾಲ ಮಾಡಿ ಖಾಸಗಿ ಶಾಲೆಗಳಿಗೆ ಸೇರಿಸುತ್ತಿದ್ದಾರೆ. ಆದರೆ ಅಲ್ಲಿನ ದುಬಾರಿ ಶುಲ್ಕವನ್ನು ಭರಿಸಲು ಪೋಷಕರು ಹರಸಾಹಸ ಪಡುತ್ತಿದ್ದಾರೆ.
ಒಟ್ಟಾರೆಯಾಗಿ, ಸರ್ಕಾರವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಪ್ರತಿ ಪಂಚಾಯಿತಿಯಲ್ಲಿ ವಸತಿ ಶಾಲೆ ಹಾಗೂ ಸಮರ್ಪಕ ವಾಹನ ಸೌಲಭ್ಯ ಕಲ್ಪಿಸಿದರೆ ಬಡ ಮತ್ತು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅದು ವರದಾನವಾಗಲಿದೆ ಎಂದು ಪೋಷಕರು ಆಶಯ ವ್ಯಕ್ತಪಡಿಸಿದ್ದಾರೆ.