29/05/2026
ಡಿ.ಕೆ. ಶಿವಕುಮಾರ್ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಕಾರ್ಯವೈಖರಿಯನ್ನು ಸ್ವತಃ ಡಿ.ಕೆ. ಶಿವಕುಮಾರ್ ಹಲವು ಬಾರಿ ಸಾರ್ವಜನಿಕವಾಗಿ ಮೆಚ್ಚಿಕೊಂಡಿದ್ದಾರೆ. ಇತ್ತೀಚಿಗೆ ಹಲವು ವೇದಿಕೆಗಳಲ್ಲಿ ಬಹಿರಂಗವಾಗಿ ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ ಎಂದು ಅಶೋಕ್ ಕುಮಾರ್ ರೈ ಘೋಷಣೆ ಕೂಡಾ ಮಾಡಿದ್ದರು. ರಾಜ್ಯದ ಕಾಂಗ್ರೆಸ್ ಉಸ್ತುವಾರಿಯಾಗಿರುವ ರಣದೀಪ್ ಸಿಂಗ್ ಸುರ್ಜೆವಾಲ ಅವರೂ ಅಶೋಕ್ ಕುಮಾರ್ ರೈ ಅವರ ರಾಜಕೀಯ ಇಚ್ಛಾಶಕ್ತಿ ಹಾಗೂ ಅಭಿವೃದ್ಧಿ ದೃಷ್ಟಿಕೋನವನ್ನು ಈಗಾಗಲೇ ಪ್ರಶಂಸಿಸಿದ್ದಾರೆ.
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸ್ತುತ ಕಾಂಗ್ರೆಸ್ನಿಂದ ಆಯ್ಕೆಯಾಗಿರುವ ಶಾಸಕರು ಯು.ಟಿ. ಖಾದರ್ ಮತ್ತು ಅಶೋಕ್ ಕುಮಾರ್ ರೈ ಮಾತ್ರವಾಗಿರುವುದು ರಾಜಕೀಯವಾಗಿ ವಿಶೇಷ ಮಹತ್ವ ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಸಂಪುಟ ವಿಸ್ತರಣೆಯಲ್ಲಿ ಅಶೋಕ್ ಕುಮಾರ್ ರೈ ಅವರಿಗೆ ಸಚಿವ ಸ್ಥಾನ ದೊರೆಯುವ ಸಾಧ್ಯತೆಗಳ ಬಗ್ಗೆ ಕಾಂಗ್ರೆಸ್ ವಲಯದಲ್ಲೇ ಚರ್ಚೆಗಳು ಜೋರಾಗಿವೆ. ಆದರೆ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಕಾರಣ ಸಚಿವ ಸ್ಥಾನ ಸುಲಭವಾಗದು ಎನ್ನುವ ಅಭಿಪ್ರಾಯಗಳೂ ಕೇಳಿಬರುತ್ತಿವೆ.
ಇನ್ನೊಂದೆಡೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಯುವ ನಾಯಕರಿಗೆ ಆದ್ಯತೆ ನೀಡುವ ಬಗ್ಗೆ ನೀಡಿರುವ ಸಂದೇಶದ ಹಿನ್ನೆಲೆ ಅಶೋಕ್ ಕುಮಾರ್ ರೈ ಅವರ ಹೆಸರು ಪ್ರಮುಖವಾಗಿ ಕೇಳಿಬರುತ್ತಿದೆ. ವಿಶೇಷವಾಗಿ ಯು.ಟಿ. ಖಾದರ್ ಅವರು ಸ್ಪೀಕರ್ ಹುದ್ದೆಯಲ್ಲೇ ಮುಂದುವರಿದರೆ ಅಶೋಕ್ ಕುಮಾರ್ ರೈ ಅವರಿಗೆ ಸಚಿವ ಸ್ಥಾನ ದೊರೆಯುವ ಸಾಧ್ಯತೆ ಹೆಚ್ಚಿದೆ ಎನ್ನಲಾಗುತ್ತಿದೆ. ಆದರೆ ಖಾದರ್ ಅವರು ಸ್ಪೀಕರ್ ಸ್ಥಾನ ತೊರೆದು ಸಂಪುಟ ಸೇರುವ ಸಾಧ್ಯತೆಯೂ ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.
ಈ ಎಲ್ಲ ರಾಜಕೀಯ ಲೆಕ್ಕಾಚಾರಗಳ ನಡುವೆ ಅಶೋಕ್ ಕುಮಾರ್ ರೈ ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದು ಹೀಗೆ:
“ನಾನು ಸಚಿವ ಸ್ಥಾನಕ್ಕಾಗಿ ಯಾವುದೇ ಲಾಬಿ ಮಾಡೋದಿಲ್ಲ. ಮಹಾಲಿಂಗೇಶ್ವರ ದೇವರ ಅನುಗ್ರಹ ಮತ್ತು ಕ್ಷೇತ್ರದ ಜನತೆಯ ಪ್ರೀತಿ, ಆಶೀರ್ವಾದದಿಂದ ಸಚಿವ ಸ್ಥಾನ ದೊರೆತರೆ ಅದನ್ನು ಜವಾಬ್ದಾರಿಯಿಂದ ನಿಭಾಯಿಸುವೆ. ಕ್ಷೇತ್ರದ ಅಭಿವೃದ್ಧಿಯೇ ನನ್ನ ಮೊದಲ ಆದ್ಯತೆ. ಸಚಿವ ಸ್ಥಾನ ದೊರೆತರೆ ಮೆಡಿಕಲ್ ಕಾಲೇಜಿನಂತಹ ಬಹು ಬೇಡಿಕೆಯ ಅಭಿವೃದ್ಧಿ ಯೋಜನೆಗಳನ್ನು ಇನ್ನಷ್ಟು ವೇಗವಾಗಿ ಪೂರ್ಣಗೊಳಿಸಲು ಸಾಧ್ಯವಾಗಲಿದೆ.”