07/06/2026
ಮಧ್ಯಪ್ರದೇಶದಲ್ಲಿ ಅಂಗನವಾಡಿಯಿಂದ ಗರ್ಭಿಣಿಗೆ ನೀಡಲಾದ ಪೌಷ್ಟಿಕ ಆಹಾರದ ಪ್ಯಾಕೆಟ್ನಲ್ಲಿ ಸತ್ತ ಹಾವಿನ ಮರಿ ಪತ್ತೆಯಾಗಿರುವ ಆತಂಕಕಾರಿ ಘಟನೆ ನಡೆದಿದೆ.
ಪಾಂಡುರ್ಣ ಜಿಲ್ಲೆ, ಕಾರ್ಘಾಟ್ ಕಮಠಿ ಗ್ರಾಮದಲ್ಲಿ ವಚಲಾ ಬಾಯಿ ಧುರ್ವೆ ಅವರಿಗೆ ಅಂಗನವಾಡಿ ಕೇಂದ್ರದಿಂದ ಲಡ್ಡುಗಳಿರುವ ಪೌಷ್ಟಿಕ ಆಹಾರದ ಪ್ಯಾಕೆಟ್ ನೀಡಲಾಗಿತ್ತು. ಮನೆಗೆ ತೆಗೆದುಕೊಂಡು ಹೋಗಿ ಪ್ಯಾಕೆಟ್ ತೆರೆಯುವಾಗ ಅದರೊಳಗೆ ಸತ್ತ ಹಾವಿನ ಮರಿ ಕಂಡು ಕುಟುಂಬಸ್ಥರು ಕಂಗಾಲಾಗಿದ್ದಾರೆ.
ಘಟನೆಯ ಬಗ್ಗೆ ತಿಳಿಯುತ್ತಿದ್ದಂತೆ ಅಂಗನವಾಡಿ ಸಿಬ್ಬಂದಿ, ಸ್ಥಳೀಯ ಆಡಳಿತ ಹಾಗೂ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು, ಪೊಲೀಸರು ಮತ್ತು ಕಂದಾಯ ಇಲಾಖೆ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಆಹಾರದ ಪ್ಯಾಕೆಟ್ ಅನ್ನು ವಶಕ್ಕೆ ಪಡೆದು ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಭೋಪಾಲ್ನ ರಾಜ್ಯ ಆಹಾರ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ನಡೆಯುತ್ತಿದ್ದು, ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಐವರು ಸದಸ್ಯರ ತನಿಖಾ ಸಮಿತಿಯನ್ನು ಕೂಡ ರಚಿಸಲಾಗಿದೆ.